
ಚಿತ್ರದುರ್ಗ ;
ಮಾಧ್ಯಮಗಳಲ್ಲಿ ವರದಿ ಬಂದ ಹಿನ್ನೆಲೆಯಲ್ಲಿ, ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿದ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ.ಸುಧಾಕರ್ ರವರು ಪರಿಶೀಲನೆ ನಡೆಸಿ, 15 ಸಿಬ್ಬಂದಿಗಳ ಪೈಕಿ 8 ಜನರಿಗೆ ರಜೆ ನೀಡಿರುವುದು ಗಂಭೀರ ನಿರ್ಲಕ್ಷ್ಯ. ಹಾಜರಾತಿ, ರಜೆ ಅರ್ಜಿ ಸೇರಿದಂತೆ ಎಲ್ಲಾ ದಾಖಲೆಗಳನ್ನು ಪರಿಶೀಲನೆಗೆ ನೀಡುವಂತೆ ಜಿಲ್ಲಾ ಶಸ್ತ್ರ ಚಿಕಿತ್ಸಕರಿಗೆ ಸೂಚಿಸಿದರು.

ಅಲ್ಲದೆ ಸಿಬ್ಬಂದಿ ಸಾಮೂಹಿಕವಾಗಿ ರಜೆ ಪಡೆದು ಪ್ರವಾಸ ತೆರಳಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ, ಜಿಲ್ಲಾಧಿಕಾರಿ ಹಾಗೂ ಜಿ.ಪಂ. ಸಿಇಓ ಅವರಿಗೆ ಕೂಲಂಕುಶವಾಗಿ ಪರಿಶೀಲನೆ ನಡೆಸುವಂತೆ ಸೂಚನೆ ನೀಡಿದರಲ್ಲದೆ, ವರದಿ ಆಧರಿಸಿ ತಪ್ಪಿತಸ್ಥರ ವಿರುದ್ಧ ನೂರಕ್ಕೆ ನೂರಷ್ಟು ಕಠಿಣ ಕ್ರಮ ಕೈಗೊಳ್ಳಲಾಗುವುದು. ಈ ಪ್ರಕರಣದಲ್ಲಿ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ ಎಂಬುದಾಗಿ ಸಚಿವರು ಎಚ್ಚರಿಸಿದರು.

ಜನರಿಗೆ ಸರಿಯಾದ ರೀತಿಯಲ್ಲಿ ಉತ್ತಮ ಚಿಕಿತ್ಸೆ ದೊರೆಯಬೇಕು ಎಂಬುದು ಸರ್ಕಾರದ ಉದ್ದೇಶವಾಗಿದ್ದು, ಜಿಲ್ಲಾಸ್ಪತ್ರೆಯಲ್ಲಿ ವೈದ್ಯರು, ಶೂಶ್ರೂಷಕರು ಹಾಗೂ ಸಿಬ್ಬಂದಿ ಕೊರತೆ ಇದ್ದು, ಇದನ್ನು ಸರಿಪಡಿಸಲು ಕ್ರಮ ಕೈಗೊಳ್ಳಲಾಗುವುದು ಎಂದರಲ್ಲದೆ ಈ ಸಂದರ್ಭದಲ್ಲಿ ತಾಯಿ ಮತ್ತು ಮಕ್ಕಳ ಆಸ್ಪತ್ರೆ, ತುರ್ತು ಚಿಕಿತ್ಸಾ ಘಟಕ ಸೇರಿದಂತೆ ವಿವಿಧ ವಾರ್ಡ್ ಗಳಿಗೆ ಭೇಟಿ ನೀಡಿ, ಒಳರೋಗಿಗಳ ಸ್ಥಿತಿಗತಿಗಳನ್ನು ವೀಕ್ಷಿಸಿದರು.

