
ಹಿರಿಯೂರು:
ಸುಮಾರು 2 ಸಾವಿರ ವರ್ಷಗಳ ಇತಿಹಾಸವನ್ನು ಹೊಂದಿರುವ ಕನ್ನಡ ಭಾಷೆಯು ಅಂತರಾಷ್ಟ್ರೀಯ ಮಟ್ಟದಲ್ಲಿ ಬಳಕೆಯಾಗುತ್ತಿದ್ದು, ಹೊರ ದೇಶದಲ್ಲಿಯೂ ಸಹ ಕನ್ನಡವನ್ನು ಪ್ರೀಯಿಸುವ ಕನ್ನಡಾಭಿಮಾನಿಗಳು ಇದ್ದಾರೆ, ಕನ್ನಡನಾಡಿನಲ್ಲಿ ಕನ್ನಡಿಗರಾದ ನಾವುಗಳು ಆಂಗ್ಲಭಾಷೆಯ ವ್ಯಾಮೋಹಕ್ಕೆ ಬಲಿಯಾಗದೇ ಕನ್ನಡದ ವ್ಯಾಮೋಹ ಬೆಳೆಸಿಕೊಳ್ಳಬೇಕು ಎಂಬುದಾಗಿ ವಾಣಿ ಕಾಲೇಜಿನ ಪ್ರಾಧ್ಯಾಪಕರಾದ ಡಾ.ಡಿ.ಧರಣೇಂದ್ರಯ್ಯ ಹೇಳಿದರು.
ತಾಲ್ಲೂಕಿನ ಯರಬಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದ್ದ “ಕನ್ನಡಪ್ರಜ್ಞೆ” ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಗ್ರಾಮೀಣ ಪ್ರದೇಶದ ಅನಕ್ಷರಸ್ಥರುಗಳಿಂದಲೇ ಇಂದು ಕನ್ನಡ ಭಾಷೆ ಉಳಿದುಕೊಂಡಿದ್ದು, ಶಿಕ್ಷಣವಂತರೆಲ್ಲರೂ ಕನ್ನಡ ಭಾಷೆ ಬಳಕೆ ಮಾಡುವುದನ್ನೇ ನಿಲ್ಲಿಸಿದ್ದಾರೆ, ಕನ್ನಡಿಗರಾದ ನಾವುಗಳು ಎಲ್ಲಾ ಭಾಷೆಗಳನ್ನು ಪ್ರೀತಿಸಬೇಕು, ಆದರೆ ಕನ್ನಡ ಭಾಷೆಯನ್ನು ಉಳಿಸಿ, ಬೆಳೆಸಬೇಕು, ಕನ್ನಡ ಭಾಷೆಯ ಶ್ರೇಷ್ಠತೆಯನ್ನು ಜಗತ್ತಿಗೆ ತಿಳಿಸಬೇಕು ಎಂಬುದಾಗಿ ಹೇಳಿದರು.
ಅಬಕಾರಿಇಲಾಖೆ ಸುರೇಂದ್ರಚಾರ್ ಮಾತನಾಡಿ, ಪ್ರಾಥಮಿಕ ಶಾಲಾ ಶಿಕ್ಷಣದಿಂದ ಉನ್ನತ ಶಿಕ್ಷಣದ ಎಲ್ಲಾ ಹಂತಗಳಲ್ಲಿ ಕನ್ನಡ ಭಾಷೆಯನ್ನು ಒಂದು ವಿಷಯವಾಗಿ ಬೋಧಿಸಬೇಕು, ಶಿಕ್ಷಣ ಹಾಗೂ ಉದ್ಯೋಗ ಕ್ಷೇತ್ರದಲ್ಲಿ ಕನ್ನಡಿಗರಿಗೇ ಮೊದಲ ಪ್ರಾಧಾನ್ಯತೆಯನ್ನು ಕೊಡಬೇಕು, ಕನ್ನಡ ನಾಡಿನಲ್ಲಿ ಕನ್ನಡಿಗರೇ ಸಾರ್ವಭೌಮರಾಗಬೇಕು ಎಂಬುದಾಗಿ ಹೇಳಿದರು. ಈ ಕಾರ್ಯಕ್ರಮದಲ್ಲಿ ವಾಣಿ ಕಾಲೇಜಿನ ಪ್ರಾಧ್ಯಾಪಕರಾದ ಡಾ.ಡಿ.ಧರಣೇಂದ್ರಯ್ಯ, ಅಬಕಾರಿಇಲಾಖೆ ಸುರೇಂದ್ರಚಾರ್, ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮುಖ್ಯ ಶಿಕ್ಷಕರಾದ ರಾಜಣ್ಣ, ಶಿಕ್ಷಕ-ಶಿಕ್ಷಕಿಯರಾದ ಅಂಬಿಕಾ, ಶಶಿಕಲಾ, ದಂಡಪ್ಪ ಹಾಗೂ ಚಿತ್ರಕಲಾ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
