
ಹಿರಿಯೂರು :
ಇಂದಿನ ವಿದ್ಯಾರ್ಥಿಗಳು ದುಶ್ಚಟಗಳಿಗೆ ದಾಸರಾಗುತ್ತಿದ್ದು, ದುಶ್ಚಟಗಳ ಅಭ್ಯಾಸದಿಂದ ನಿಮ್ಮ ಶಿಕ್ಷಣ ಕುಂಠಿತವಾಗುವ ಜೊತೆಗೆ ನಿಮ್ಮ ಆರೋಗ್ಯ ಕ್ಷೀಣಿಸುತ್ತದೆ, ಆದ್ದರಿಂದ ವಿದ್ಯಾರ್ಥಿಗಳು ದುಶ್ಚಟಗಳಿಂದ ದೂರವಿರಬೇಕು, ನಿಮ್ಮ ಆರೋಗ್ಯವನ್ನು ಕಾಪಾಡಿಕೊಂಡು ವಿದ್ಯಾವಂತರಾಗುವ ಮೂಲಕ ಸಮಾಜಕ್ಕೆ ಒಳ್ಳೆಯ ಸುಸಂಸ್ಕೃತ ಪ್ರಜೆಗಳಾಗಬೇಕು ಎಂಬುದಾಗಿ ವಾಣಿಕಾಲೇಜಿನ ಸಹ ಪ್ರಾಧ್ಯಾಪಕರಾದ ಡಾ.ಡಿ.ಧರಣೇಂದ್ರಯ್ಯ ಹೇಳಿದರು.

ತಾಲ್ಲೂಕಿನ ದಿಂಡಾವರಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿಸಿಟ್ರಸ್ಟ್ ವಿವಿಪುರ ಇವರ ವತಿಯಿಂದ ಹಮ್ಮಿಕೊಳ್ಳಲಾಗಿದ್ದ “ಸ್ವಾಸ್ಥ್ಯ ಸಂಕಲ್ಪ” ಕಾರ್ಯಕ್ರಮವನ್ನು ಉದ್ಘಾಟಿಸಿ, ನಂತರ ಅವರು ಮಾತನಾಡಿದರು. ಇಲ್ಲಿನ ವಿದ್ಯಾರ್ಥಿಗಳು ಜೀವನೋಪಾಯಕ್ಕೆ ತಂದೆ ತಾಯಿಗಳ ಜೊತೆಯಲ್ಲಿ ಕುರಿಗಾಯಿಗಳಾಗಿ ಕುಳೆ ಹೋಗುವುದರಿಂದ ಶಿಕ್ಷಣಕ್ಕೆ ತೊಂದರೆಯಾಗುತ್ತದೆ

ಈ ಭಾಗದಲ್ಲಿ ಇತ್ತೀಚೆಗೆ ವಿದ್ಯಾರ್ಥಿನಿಯರು ಚಿಕ್ಕ ವಯಸ್ಸಿನಲ್ಲಿಯೇ ಬಾಲ್ಯ ವಿವಾಹವಾಗುತ್ತಿದ್ದು, ಇದು ಶಿಕ್ಷಾರ್ಹ ಅಪರಾಧವಾಗಿದೆ, ಚಿಕ್ಕ ವಯಸ್ಸಿನಲ್ಲಿಯೇ ಮದುವೆಯಾದರೆ ವಿದ್ಯಾರ್ಥಿನಿಯರು ಶಿಕ್ಷಣದಿಂದ ವಂಚಿತರಾಗುತ್ತೀರಿ, ಇದರಿಂದ ನೀವು ಮನೆಯ ನಾಲ್ಕು ಗೋಡೆಗಳ ಮಧ್ಯೆಯೇ ಉಳಿಯುವಂತಾಗುತ್ತದೆ, ಈ ಬಗ್ಗೆ ನೀವು ಪೋಷಕರಲ್ಲಿ ಜಾಗೃತಿ ಮೂಡಿಸಬೇಕು ಎಂಬುದಾಗಿ ಹೇಳಿದರು.
ವಿದ್ಯಾರ್ಥಿಗಳು ನಿಮ್ಮ ಆರೋಗ್ಯವನ್ನು ಸುರಕ್ಷಿತವಾಗಿಟ್ಟುಕೊಳ್ಳಲು ಪೌಷ್ಟಿಕ ಆಹಾರವನ್ನು ಸೇವಿಸಿ, ಶಿಕ್ಷಕರ ಮಾರ್ಗದರ್ಶನದಲ್ಲಿ ವಿದ್ಯಾವಂತರಾಗುವ ಮೂಲಕ ನಿಮ್ಮ ಭವಿಷ್ಯವನ್ನು ರೂಪಿಸಿಕೊಳ್ಳುವ, ಜೊತೆಗೆ ನಿಮ್ಮ ತಂದೆ ತಾಯಿಗಳನ್ನು ಪ್ರೀತಿಯಿಂದ ಆರೈಕೆ ಮಾಡಿ ಇದರಿಂದ ಸಾಮಾಜಿಕ ಸುಖಜೀವನ ಸಾಗಿಸಬಹುದಾಗಿದೆ ಎಂಬುದಾಗಿ ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಮುಖ್ಯೋಪಾಧ್ಯಾಯರಾದ ಮಹಾಂತೇಶ್ ಮಾತನಾಡಿ, ವಿದ್ಯಾರ್ಥಿಗಳು ನಿಮ್ಮ ಆರೋಗ್ಯವನ್ನು ಕಾಪಾಡಿಕೊಂಡರೆ ಮಾತ್ರ ಓದಿನ ಕಡೆಗೆ ಗಮನ ಹರಿಸಲು ಸಾಧ್ಯ, ವಿದ್ಯಾರ್ಥಿಗಳು ಹೊಸಹೊಸ ವಿಚಾರಗಳನ್ನು ಕೇಳುವುದರಿಂದ ವ್ಯಕ್ತಿತ್ವ ವಿಕಸನಕ್ಕೆ ದಾರಿಯಾಗುತ್ತದೆ ಎಂಬುದಾಗಿ ಹೇಳಿದರು.
ಈ ಕಾರ್ಯಕ್ರಮದಲ್ಲಿ ಶಿಕ್ಷಕಿ ಶ್ರೀಮತಿ ರೂಪಾಕಲಾ ಶಿಕ್ಷಕರಾದ ಜೈರಾಮ್, ಶಿವಮೂರ್ತಿ ಧರ್ಮಸ್ಥಳ ಸಂಸ್ಥೆಯ ವಿವಿಪುರ ವಲಯ ಸಂಚಾಲಕಿ ಸುರೇಖಾ ಹಾಗೂ ಬಾಬು ಉಪಸ್ಥಿತರಿದ್ದರು.

