
ಹಿರಿಯೂರು:
ಆರೋಗ್ಯ ಹಾಗೂ ಮಾನಸಿಕ ನೆಮ್ಮದಿ ಸಂತೋಷಕ್ಕೆ ಕ್ರೀಡೆಗಳು ಅವಶ್ಯಕವಾಗಿದ್ದು, ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಶಿಕ್ಷಣದ ಜೊತೆಯಲ್ಲಿ ಕ್ರೀಡಾಮನೋಭಾವ, ಜೀವನದಲ್ಲಿ ಶಿಸ್ತು, ಸಂಯಮ, ದೇಶಪ್ರೇಮವನ್ನು ರೂಢಿಸಿಕೊಂಡು ಸಮಾಜದಲ್ಲಿ ಉತ್ತಮ ಪ್ರಜೆಗಳಾಗಿ ಹೊರಹೊಮ್ಮಬೇಕು. ಎಂಬುದಾಗಿ ರಾಜ್ಯದ ಯೋಜನಾ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ.ಸುಧಾಕರ್ ಅವರು ಹೇಳಿದರು.

ನಗರದ ತಾಲ್ಲೂಕು ಕ್ರೀಡಾಂಗಣದಲ್ಲಿ ಶಾಲಾ ಶಿಕ್ಷಣ ಇಲಾಖೆ ಚಿತ್ರದುರ್ಗ ಹಾಗೂ ಶ್ರೀರಂಗನಾಥ ಪದವಿ ಪೂರ್ವ ಕಾಲೇಜು ಹಿರಿಯೂರು ಇವರುಗಳ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ 2025-26ನೇ ಸಾಲಿನ ಪದವಿ ಪೂರ್ವ ಕಾಲೇಜುಗಳ ತಾಲ್ಲೂಕು ಮಟ್ಟದ ಕ್ರೀಡಾಕೂಟವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ವಿದ್ಯಾರ್ಥಿಗಳಾದ ನೀವು ಕ್ರೀಡೆಗಳಲ್ಲಿ ಸೋಲು ಗೆಲುವುಗಳನ್ನು ಕ್ರೀಡಾಮನೋಭಾವದಿಂದ ಸ್ವೀಕರಿಸಬೇಕು, ಅಲ್ಲದೆ ವಿದ್ಯಾರ್ಥಿಗಳು ಕೇವಲ ಅಂಕಗಳಿಕೆಗೆ ಮಾತ್ರ ಒತ್ತು ನೀಡದೇ ಒಳ್ಳೆಯ ಹವ್ಯಾಸಗಳನ್ನು, ಮೌಲ್ಯಗಳನ್ನು ರೂಢಿಸಿಕೊಳ್ಳುವ ಮೂಲಕ ಉತ್ತಮ ವ್ಯಕ್ತಿತ್ವವನ್ನು ಬೆಳೆಸಿಕೊಳ್ಳುವ ಮೂಲಕ ವಿದ್ಯಾವಂತರಾಗಿ ಸಮಾಜದ ಮುಖ್ಯವಾಹಿನಿಗೆ ಬರಬೇಕು ಎಂಬುದಾಗಿ ಅವರು ಕರೆ ನೀಡಿದರು.

ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ರಂಗನಾಥ ವಿದ್ಯಾಸಂಸ್ಥೆಯ ಕಾರ್ಯದರ್ಶಿಗಳಾದ ಟಿ.ವೀರಕರಿಯಪ್ಪ ವಹಿಸಿದ್ದರು. ಕಾರ್ಯಕ್ರಮದಲ್ಲಿ ನಗರಸಭಾ ಅಧ್ಯಕ್ಷ ಆರ್.ಬಾಲಕೃಷ್ಣ, ಕಾಲೇಜುಗಳ ಉಪನಿರ್ದೇಶಕರಾದ ಕೆ.ತಿಮ್ಮಯ್ಯ, ಚಿತ್ರದುರ್ಗ ಜಿಲ್ಲಾ ಪಂಚಾಯತ್ ಗ್ಯಾರಂಟಿಗಳ ಜಿಲ್ಲಾ ಉಪಾಧ್ಯಕ್ಷ ಖಾದಿ ಜೆ.ರಮೇಶ್ , ತಾಲ್ಲೂಕು ಪಂಚ ಗ್ಯಾರಂಟಿಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ಪಿ.ಕೃಷ್ಣಮೂರ್ತಿ, ತಾಲ್ಲೂಕು ದೈಹಿಕ ಶಿಕ್ಷಣ ಅಧಿಕಾರಿ ರವೀಂದ್ರ ನಾಯ್ಕ್, ನಗರಸಭೆ ಪೌರಾಯುಕ್ತ ಎ.ವಾಸಿಂ, ನಗರಸಭೆಸ್ಥಾಯಿಸಮಿತಿ ಅಧ್ಯಕ್ಷ ಸಣ್ಣಪ್ಪ, ಶ್ರೀಮತಿ ಮಮತಾ, ಮುಖಂಡರಾದ ಜ್ಞಾನೇಶ್, ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘದ ಅಧ್ಯಕ್ಷ ಕೆಆರ್ ತಿಪ್ಪೇಸ್ವಾಮಿ, ತಾಲ್ಲೂಕು ಪ್ರೌಢಶಾಲೆ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಹೆಚ್.ತಿಪ್ಪೇಸ್ವಾಮಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
