
ಹಿರಿಯೂರು:
ತಾಲ್ಲೂಕಿನ ಜೆ.ಜೆ.ಹಳ್ಳಿ ಹೋಬಳಿಯ ಆರು ಗ್ರಾಮಪಂಚಾಯಿತಿ ವ್ಯಾಪ್ತಿಯ ನೂರು ಹಳ್ಳಿಗಳಿಗೆ ಶಾಶ್ವತ ಕುಡಿಯುವ ನೀರುಪೂರೈಕೆ, ಅಂತರ್ಜಲ ವೃದ್ಧಿಗೆ 15 ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ಶೀಘ್ರ ಚಾಲನೆ ನೀಡಲಾಗುವುದು ಎಂಬುದಾಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ.ಸುಧಾಕರ್ ಅವರು ಹೇಳಿದರು.
ಬೆಳಗಾವಿಯ ಸುವರ್ಣಸೌಧದಲ್ಲಿ ನೀರಾವರಿ ಇಲಾಖೆ ಅಧಿಕಾರಿಗಳ ಸಭೆಯಲ್ಲಿ ಆತನಾಡಿ, ನೀರಿನಲಭ್ಯತೆ, ಹಂಚಿಕೆ, ಅನುಷ್ಠಾನ ಕುರಿತು ನೀರಾವರಿ ಇಲಾಖೆ ಅಧಿಕಾರಿಗಳ ಜತೆ ಚರ್ಚೆ ನಡೆಸಲಾಗಿದ್ದು, ಈಗಾಗಲೇ ಡಿ.ಪಿ.ಆರ್.ಸಿದ್ಧಪಡಿಸಿ, ವಿಶೇಷಅನುದಾನ ನೀಡುವಂತೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಎಂದರಲ್ಲದೆ,

ಜೆ.ಜೆ.ಹಳ್ಳಿ ಹೋಬಳಿಯ ಜೀವನಾಡಿ ಗಾಯಿತ್ರಿ ಜಲಾಶಯಕ್ಕೆ ಭದ್ರಾ ಮೇಲ್ದಂಡೆ ಯೋಜನೆಯಡಿ ನೀರು ಹರಿಸಲು ಪ್ರಯತ್ನಿಸಲಾಗುವುದು.ಜೆ.ಜೆ.ಹಳ್ಳಿ-ಕಲುವಳ್ಳಿ ಭಾಗದಲ್ಲಿ ಕಳೆದ ನಾಲ್ಕೈದು ವರ್ಷ ಮಳೆಯಾಗದೆ ಅಂತರ್ಜಲ ಕುಸಿತದಿಂದ ಜನ-ಜಾನುವಾರು ಹನಿ ನೀರಿಗೂ ಪರದಾಡುವಂತಾಗಿದೆ. ಕೆರೆಗಳಿಗೆ ನೀರು ತುಂಬಿಸುವುದರಿಂದಅಂತರ್ಜಲ ವೃದ್ಧಿಯಾಗಿ ಕುಡಿವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಸಿಗಲಿದೆ ಎಂಬುದಾಗಿ ಅವರು ಹೇಳಿದರು.

ಈ ಸಭೆಯಲ್ಲಿ ಚಳ್ಳಕೆರೆ ಶಾಸಕರಾದ ಟಿ.ರಘುಮೂರ್ತಿ, ನೀರಾವರಿ ಇಲಾಖೆ ತಾಂತ್ರಿಕ ಸಲಹೆಗಾರ ಜಯಪ್ರಕಾಶ್, ಸಣ್ಣನೀರಾವರಿ ಇಲಾಖೆ ಕಾರ್ಯದರ್ಶಿ ಬಿ.ಕೆ.ಪವಿತ್ರಾ, ವಿಶ್ವೇಶ್ವರಯ್ಯ, ಜಲ ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಸಣ್ಣಚಿತ್ತಯ್ಯ, ಮುಖ್ಯ ಎಂಜಿನಿಯರ್ ಪ್ರಕಾಶ್ ಶ್ರೀಹರಿ, ಕೆ.ಪಿ.ಸಿ.ಸಿ.ಸದಸ್ಯರಾದ ಅಮೃತೇಶ್ವರ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

