
ಹಿರಿಯೂರು :
ತಾಲ್ಲೂಕಿನಲ್ಲಿ ಬೆಂಬಲ ಬೆಲೆಯಲ್ಲಿ ತೊಗರಿ ಖರೀದಿಸುವ ಪ್ರಕ್ರಿಯೆಗೆ ನೋಂದಣಿ ಮಾಡಿಕೊಳ್ಳಲು ಈಶ ಸಂಸ್ಥೆಗೆ ವಹಿಸಿರುವ ಜವಾಬ್ದಾರಿಯನ್ನು ಹಿಂದಕ್ಕೆ ಪಡೆಯಬೇಕು ಎಂದು ರೈತರು ಒತ್ತಾಯಿಸಿದ್ದರೂ, ಸಂಸ್ಥೆಯನ್ನು ಮುಂದುವರಿಸಿರುವುದು ಖಂಡನೀಯ ಎಂಬುದಾಗಿ ರಾಜ್ಯ ರೈತಸಂಘ ಮತ್ತು ಹಸಿರುಸೇನೆ ಜಿಲ್ಲಾಧ್ಯಕ್ಷರಾದ ಕೆ.ಟಿ.ತಿಪ್ಪೇಸ್ವಾಮಿ ಹೇಳಿದರು.
ನಗರದ ತಾಲ್ಲೂಕು ಕಚೇರಿ ಆವರಣದಲ್ಲಿ ರಾಜ್ಯ ರೈತಸಂಘ ಮತ್ತು ಹಸಿರುಸೇನೆ ವತಿಯಿಂದ ತಾಲ್ಲೂಕಿನಲ್ಲಿ ಬೆಂಬಲ ಬೆಲೆಯಲ್ಲಿ ತೊಗರಿ ಖರೀದಿಸುವ ಪ್ರಕ್ರಿಯೆಗೆ ನೋಂದಣಿ ಮಾಡಿಕೊಳ್ಳಲು ಈಶ ಸಂಸ್ಥೆಗೆ ವಹಿಸಿರುವ ಜವಾಬ್ದಾರಿಯನ್ನು ಹಿಂದಕ್ಕೆ ಪಡೆಯಬೇಕೆಂದು ಒತ್ತಾಯಿಸಿ, ತಾಲ್ಲೂಕು ತಹಶೀಲ್ದಾರರಿಗೆ ಮನವಿಪತ್ರವನ್ನು ಸಲ್ಲಿಸಿ, ನಂತರ ಅವರು ಮಾತನಾಡಿದರು.
ಈಶ ಸಂಸ್ಥೆ ರೈತರ ದಾಖಲೆಗಳನ್ನು ದುರುಪಯೋಗ ಮಾಡಿಕೊಂಡಲ್ಲಿ ಸಂಬಂಧಿಸಿದ ಇಲಾಖೆಗಳೇ ಹೊಣೆ ಹೊರಬೇಕಾಗುತ್ತದೆ. ಸರ್ಕಾರ ತಕ್ಷಣ ಟಾಸ್ಕ್ ಫೋರ್ಸ್ ಸಮಿತಿಯ ಎಲ್ಲಾ ಅಧಿಕಾರಿಗಳನ್ನು ಅಮಾನತ್ತುಗೊಳಿಸಬೇಕು, ಇಲ್ಲವಾದಲ್ಲಿ ರಾಜ್ಯ ರೈತಸಂಘ ಮತ್ತು ಹಸಿರುಸೇನೆ ವತಿಯಿಂದ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂಬುದಾಗಿ ಹೇಳಿದರು.
ಈ ಸಂದರ್ಭದಲ್ಲಿ ರಾಜ್ಯ ರೈತಸಂಘ ಮತ್ತು ಹಸಿರುಸೇನೆಯ ರಾಜ್ಯ ಕಾರ್ಯಾಧ್ಯಕ್ಷ ಈಚಘಟ್ಟಸಿದ್ದವೀರಪ್ಪ, ತಾಲ್ಲೂಕು ಅಧ್ಯಕ್ಷ ಆಲೂರು ಸಿದ್ದರಾಮಣ್ಣ, ಮುಖಂಡರಾದ ತಿಪ್ಪೀರಣ್ಣ, ಜಿ.ಪಿ. ಯಶವಂತರಾಜು, ಅರಳೀಕೆರೆ ತಿಪ್ಪೇಸ್ವಾಮಿ, ಎಂ.ಆರ್. ವೀರಣ್ಣ, ಈರಣ್ಣ, ವದ್ದೀಕೆರೆ ಕಾಂತರಾಜು, ಕಲ್ಲಟ್ಟಿ ಪಾತಣ್ಣ, ತಿಮ್ಮಾರೆಡ್ಡಿ, ಸಣ್ಣತಿಮ್ಮಣ್ಣ, ಎಚ್.ಟಿ. ಚಂದ್ರಶೇಖರ್, ನಂದಿಹಳ್ಳಿ ರಂಗಸ್ವಾಮಿ, ಜಯಣ್ಣ, ಜಗನ್ನಾಥ್, ವಿರುಪಾಕ್ಷ, ನಿಂಗಪ್ಪ, ಬಿ.ಆರ್. ರಂಗಸ್ವಾಮಿ, ಶಿವಣ್ಣ, ಬಾಲಕೃಷ್ಣ, ರಾಮಕೃಷ್ಣ ಪಾಲ್ಗೊಂಡಿದ್ದರು.

