
ಹಿರಿಯೂರು:
ನಮ್ಮ ಹಕ್ಕು ಮತ್ತು ಕರ್ತವ್ಯಗಳನ್ನು ಮರುಕಳಿಸುತ್ತ 1950 ಜನವರಿ 26 ರಂದು ಭಾರತ ಸಂವಿಧಾನ ಜಾರಿಗೆ ಬಂದು, ನಮ್ಮ ದೇಶವು ಸಾರ್ವಭೌಮ, ಪ್ರಜಾಸತ್ತಾತ್ಮಕ ಗಣರಾಜ್ಯವಾಗಿ ಹೊರಹೊಮ್ಮಿದೆ. ಈ ಐತಿಹಾಸಿಕ ದಿನದ ನೆನಪಿನಲ್ಲಿ ಸಂಭ್ರಮದಿಂದ ಆಚರಣೆಯನ್ನು ಮಾಡುತ್ತಿದ್ದೇವೆ ಎಂಬುದಾಗಿ ನಗರಸಭೆ ಪೌರಾಯುಕ್ತರಾದ ಎ.ವಾಸೀಂ ಅವರು ಹೇಳಿದರು.

ನಗರದ ನಗರಸಭೆ ಆವರಣದಲ್ಲಿ ಹಮ್ಮಿಕೊಳ್ಳಲಾಗಿದ್ದ 77ನೇ ಗಣರಾಜ್ಯೋತ್ಸವ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಅವರು ಮಾತನಾಡಿದರು.
ಡಾ.ಬಿ.ಆರ್.ಅಂಬೇಡ್ಕರ್ ಅವರ ನೇತೃತ್ವದಲ್ಲಿ ರಚಿತವಾದ ಸಂವಿಧಾನವು ಪ್ರತಿಯೊಬ್ಬ ನಾಗರೀಕನಿಗೂ ಸಮಾನತೆ, ಸ್ವಾತಂತ್ರ್ಯ ಮತ್ತು ನ್ಯಾಯವನ್ನು ಒದಗಿಸಿದೆ. ಈ ದಿನವು ಕೇವಲ ಹಬ್ಬವಲ್ಲದೆ ನಮ್ಮ ಹಕ್ಕು ಮತ್ತು ಕರ್ತವ್ಯಗಳನ್ನು ಮರುಚಿಂತನೆ ಮಾಡುವ ದಿನವಾಗಿದೆ ಎಂಬುದಾಗಿ ಅವರು ಹೇಳಿದರು.

ಇದೇ ಸಂದರ್ಭದಲ್ಲಿ ತಾಲ್ಲೂಕು ಆಡಳಿತ ವರ್ಗದಿಂದ ಉತ್ತಮ ಬಿ.ಎಲ್.ಒ. ಪ್ರಶಸ್ತಿ ಸ್ವೀಕರಿಸಿದ ಕಾಣುಮಯ್ಯ ಮತ್ತು ಬಿ.ಎಲ್.ಒ. ಸೂಪರ್ವೈಸರ್ ಪ್ರಶಸ್ತಿ ಸ್ವೀಕರಿಸಿದ ಮೊಹಮ್ಮದ್ ಹಸ್ರಾತ್ ಉಲ್ಲಾ ರವರಿಗೆ ನಗರಸಭೆ ವತಿಯಿಂದ ಅಭಿನಂದಿಸಲಾಯಿತು. ಈ ಸಂದರ್ಭದಲ್ಲಿ ನಗರಸಭೆಯ ಸಿಬ್ಬಂದಿಗಳು, ಹಾಗೂ ಕಾರ್ಮಿಕರು ಉಪಸ್ಥಿತರಿದ್ದರು.
