
ಹಿರಿಯೂರು :
ತಾಲ್ಲೂಕಿನ ಐಮಂಗಲ ಗ್ರಾಮದ ಕಿತ್ತೂರು ರಾಣಿಚೆನ್ನಮ್ಮ ಮುರಾರ್ಜಿ ವಸತಿ ನಿಲಯದಲ್ಲಿ ವಿಷದ ಆಹಾರ ತಿಂದು ಮಕ್ಕಳು ಸುಮಾರು 41 ಮಕ್ಕಳು ಅಸ್ವಸ್ಥಗೊಂಡಿದ್ದಾರೆ, ತುರ್ತು ಚಿಕಿತ್ಸೆಗೆ ಮಕ್ಕಳನ್ನು ಮರಡಿಹಳ್ಳಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರಲ್ಲಿ 7 ಮಕ್ಕಳ ಸ್ಥಿತಿ ಗಂಭೀರವಾಗಿದ್ದರಿಂದ ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ ಎಂಬುದಾಗಿ ಸಚಿವರಾದ ಡಿ.ಸುಧಾಕರ್ ಹೇಳಿದರು.
ತಾಲ್ಲೂಕಿನ ಮರಡಿಹಳ್ಳಿ ಆಸ್ಪತ್ರೆಗೆ ಭೇಟಿ ನೀಡಿ, ಮಕ್ಕಳ ಯೋಗಕ್ಷೇಮ ವಿಚಾರಿಸಿದ ಅವರು ಆತಂಕದಲ್ಲಿದ್ದ ಪೋಷಕರಿಗೆ ಧೈರ್ಯ ಹೇಳಿ, ನಂತರ ಮಾಧ್ಯಮಗಳೊಂದಿಗೆ ಮಾತನಾಡಿದರು.

ಉಳಿದ ಮಕ್ಕಳಿಗೆ ಮರಡಿಹಳ್ಳಿ ಆಸ್ಪತ್ರೆಯಲ್ಲೇ ಚಿಕಿತ್ಸೆ ಮುಂದುವರಿದಿದೆ. ಮುಂದಿನ ದಿನಗಳಲ್ಲಿ ವಸತಿ ನಿಲಯದಲ್ಲಿ ಸ್ವಚ್ಛತೆ ವ್ಯವಸ್ಥೆ, ಆಹಾರದ ಗುಣಮಟ್ಟ, ಕುಡಿಯುವ ನೀರಿನ ಸುರಕ್ಷತೆ, ಇವುಗಳ ಕುರಿತು ಈ ಕೂಡಲೇ ಕಟ್ಟುನಿಟ್ಟಿನ ಕ್ರಮ ಕೈಗೊಂಡು, ಪರಿಶೀಲನೆ ನಡೆಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಇದೇ ಸಂದರ್ಭದಲ್ಲಿ ತಳಮಟ್ಟದ ನಿರ್ಲಕ್ಷ್ಯಕ್ಕೆ ಕಾರಣರಾದವರ ವಿರುದ್ಧ ಕಠಿಣ ಕ್ರಮವನ್ನು ಕೈಗೊಳ್ಳಲಾಗುವುದು, ಪೋಷಕರು ಯಾವುದೇ ರೀತಿಯಲ್ಲಿ ಭಯ ಪಡುವ ಅಗತ್ಯವಿಲ್ಲ ಧೈರ್ಯವಾಗಿರಿ ಎಂಬುದಾಗಿ ಅವರು ಭರವಸೆ ನೀಡಿದರಲ್ಲದೆ, ಮಕ್ಕಳು ಶೀಘ್ರ ಗುಣಮುಖರಾಗಲಿ ಎಂಬುದಾಗಿ ಅವರು ಶುಭಹಾರೈಸಿದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರು ಹಾಗೂ ಪಕ್ಷದ ಕಾರ್ಯಕರ್ತರು ಹಾಗೂ ಆಸ್ಪತ್ರೆಯ ವೈದ್ಯರು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

