
ಹಿರಿಯೂರು :
ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಯುವಕರಲ್ಲಿ ತಾರ್ಕಿಕ ಮನೋಭಾವ, ವೈಜ್ಞಾನಿಕ ಚಿಂತನೆ, ಮಾನವೀಯ ಮೌಲ್ಯಗಳನ್ನು ಬೆಳೆಸುವಂತಹ ಶಿಕ್ಷಣ ಅತ್ಯಗತ್ಯವಾಗಿದ್ದು, ಈ ನಿಟ್ಟಿನಲ್ಲಿ ವಿಚಾರ ಸಂಕಿರಣದಂತಹ ಕಾರ್ಯಕ್ರಮಗಳು ಪ್ರಮುಖ ಪಾತ್ರ ವಹಿಸುತ್ತವೆ ಎಂಬುದಾಗಿ ಕುವೆಂಪು ವಿಶ್ವವಿದ್ಯಾನಿಲಯದ ನಿವೃತ್ತ ಪ್ರಾಧ್ಯಾಪಕರಾದ ಜೆ.ಸಣ್ಣಪ್ಪ ಹೇಳಿದರು.
ನಗರದ ವಾಣಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಂಗಳವಾರ ಮೈಸೂರಿನ ಅರಿವಿನ ಸಂಸ್ಥೆ ಸಹಯೋಗದಲ್ಲಿ ಯುವಕರಲ್ಲಿ ವೈಜ್ಞಾನಿಕ ಚಿಂತನೆ, ತಾರ್ಕಿಕ ಮತ್ತು ಮಾನವೀಯ ಮೌಲ್ಯಗಳ ಅಗತ್ಯತೆ ಹಾಗೂ ಸಾಮಾಜಿಕ ಜಾಲತಾಣಗಳ ಪ್ರಭಾವ ಎಂಬ ವಿಷಯದ ಕುರಿತು ಹಮ್ಮಿಕೊಳ್ಳಲಾಗಿದ್ದ ವಿಚಾರ ಸಂಕಿರಣ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಮಾನವೀಯ ಮೌಲ್ಯಗಳಿಲ್ಲದೆ ಜವಾಬ್ದಾರಿಯುತ ಸಮಾಜ ನಿರ್ಮಾಣ ಅಸಾಧ್ಯ, ಕುವೆಂಪು ಅವರು ಕಂಡಿದ್ದ ವೈಚಾರಿಕತೆಯನ್ನು ನಾವೆಲ್ಲ ಅಳವಡಿಸಿಕೊಳ್ಳಬೇಕಿದೆ, ಶಿಕ್ಷಣದಿಂದ ಮಾತ್ರ ಸಮಾಜದಲ್ಲಿನ ಸಮಸ್ಯೆಗಳಿಗೆ ಪರಿಹಾರ ಸಾಧ್ಯ, ವಿದ್ಯಾರ್ಥಿಗಳು ಅಂಧಶ್ರದ್ಧೆ, ಮೂಢನಂಬಿಕೆಗಳಿಂದ ದೂರ ಇರಬೇಕು ಎಂಬುದಾಗಿ ಸಲಹೆ ನೀಡಿದರು.
ವಿಚಾರ ಸಂಕಿರಣ ಉದ್ಘಾಟಿಸಿದ ಮೈಸೂರಿನ ನಿವೃತ್ತ ಪ್ರಾಧ್ಯಾಪಕರಾದ ಜಿ.ವೆಂಕಟೇಶ್ ಕುಮಾರ್ ಯುವಕರ ಮೇಲೆ ಸಾಮಾಜಿಕ ಜಾಲತಾಣಗಳ ಪ್ರಭಾವ ಎಷ್ಟಿದೆ ಎಂಬುದು ಊಹಾತೀತ, ಸ್ವಂತ ಆಲೋಚನೆಗಳ ಮೂಲಕ ತಮ್ಮ ಬದುಕನ್ನು ರೂಪಿಸಿಕೊಳ್ಳುವ ಕಲೆಯನ್ನು ಎಲ್ಲರೂ ರೂಡಿಸಿಕೊಳ್ಳಬೇಕು, ಮತ್ತೊಬ್ಬರ ಬದುಕಿನ ಅನುಕರಣೆ ಒಳ್ಳೆಯ ಲಕ್ಷಣವಲ್ಲ ಎಂಬುದಾಗಿ ಎಚ್ಚರಿಸಿದರು.
ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಂಶುಪಾಲರಾದ ಪ್ರೊ.ಆರ್.ಮಹೇಶ್ ವಹಿಸಿದ್ದರು. ಕಾರ್ಯಕ್ರಮದಲ್ಲಿ ಪ್ರಾಧ್ಯಾಪಕರಾದ ಪ್ರೊಫೆಸರ್ ಡಿ.ಧರಣೇಂದ್ರಯ್ಯ, ಬಿ.ಆರ್.ಹೇಮಲತಾ, ಆರ್.ಗಂಗಾಧರ್, ಜಿ.ಎಸ್.ರಾಮಪ್ಪ, ಮೊಹಮ್ಮದ್ ಸಾದತ್, ಬಿ.ಟಿ.ಭರತ್, ಆರ್.ವಲಿ, ಪಿ.ಎನ್.ನರಸಿಂಹಮೂರ್ತಿ ಉಪಸ್ಥಿತರಿದ್ದರು. ಆರಂಭದಲ್ಲಿ ರೇಖಾ ನಿರೂಪಿಸಿದರು. ಜಯಶ್ರೀ ವಂದಿಸಿದರು.
