
ಹಿರಿಯೂರು:
ತಾಲ್ಲೂಕಿನ ದಲಿತ ಕಾಲನಿಗಳ ಸಮಗ್ರ ಅಭಿವೃದ್ಧಿಗೆ ವಿಶೇಷ ಅನುದಾನವನ್ನು ನೀಡಲಾಗುವುದು ಎಂಬುದಾಗಿ ರಾಜ್ಯ ಯೋಜನಾ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ.ಸುಧಾಕರ್ ಅವರು ಹೇಳಿದರು.
ತಾಲ್ಲೂಕಿನ ಬ್ಯಾಡರಹಳ್ಳಿ ದಲಿತ ಕಾಲನಿಯಲ್ಲಿ ವಿವಿಧ ಅಭಿವೃದ್ಧಿಯ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.

ರಾಜ್ಯ ಸರ್ಕಾರದ ಪಂಚಗ್ಯಾರಂಟಿ ಯೋಜನೆಗಳು ಹಿಂದುಳಿದ ವರ್ಗಗಳ ಶ್ರೇಯೋಭಿವೃದ್ಧಿಗೆ ಪೂರಕವಾಗಿವೆ. ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರ ಆಶಯದಂತೆ ಸಮಾನತೆ, ಸಮಸಮಾಜ ನಿರ್ಮಾಣಕ್ಕೆ ದಲಿತರಿಗೆ ಶೈಕ್ಷಣಿಕ, ಆರ್ಥಿಕ, ಸಾಮಾಜಿಕ, ರಾಜಕೀಯ ಅವಕಾಶದ ಜತೆ ಕಾಲನಿಗಳ ಅಭಿವೃದ್ಧಿಗೆ ರಾಜ್ಯ ಸರ್ಕಾರ ಬದ್ಧವಾಗಿದೆ. ಎಂದರಲ್ಲದೆ,

ಪ್ರತಿ ಚುನಾವಣೆಯಲ್ಲಿ ದಲಿತ ಸಮುದಾಯ ದೊಡ್ಡ ಮಟ್ಟದಲ್ಲಿ ಕಾಂಗ್ರೆಸ್ ನ್ನು ಬೆಂಬಲಿಸಿಕೊಂಡು ಬಂದಿದೆ. ಅವರ ಋಣ ತೀರಿಸಲು ಶಕ್ತಿ ಮೀರಿ ಪ್ರಯತ್ನಿಸಲಾಗುವುದು ಎಂಬುದಾಗಿ ಅವರು ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಖಾದಿರಮೇಶ್, ಮುಖಂಡರಾದ ಮಂಜುನಾಥ್, ಶಿವಕುಮಾರ್, ಜ್ಞಾನೇಶ್, ಜಿ.ಎಲ್.ಮೂರ್ತಿ, ತಿಪ್ಪೇಸ್ವಾಮಿ, ರಾಮಣ್ಣ ಸೇರಿದಂತೆ ಅನೇಕ ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು.

