
ಹಿರಿಯೂರು :
ಯುಗದ ಕವಿ ಎಂದೇ ಪ್ರಸಿದ್ಧರಾಗಿ ರಾಷ್ಟ್ರಕವಿ ಕುವೆಂಪುರವರು ಕನ್ನಡದ ಮಹಾನ್ ಕವಿ, ನಾಟಕಕಾರ, ಕಾದಂಬರಿಕಾರ, ಮತ್ತು ಚಿಂತಕರಾಗಿದ್ದು, ಕನ್ನಡಕ್ಕೆ ಮೊದಲ ಜ್ಞಾನಪೀಠ ಪ್ರಶಸ್ತಿಯನ್ನು ತಂದುಕೊಟ್ಟ ಮಹಾನ್ ಚೇತನ ಎಂಬುದಾಗಿ ಉಪತಹಶೀಲ್ದಾರರಾದ ಕೆ.ಬಿ.ತಿಪ್ಪೇಸ್ವಾಮಿ ಹೇಳಿದರು.

ನಗರದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ತಾಲ್ಲೂಕು ಆಡಳಿತ, ನಗರಸಭೆ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಇವರುಗಳ ಸಂಯುಕ್ತಾಶ್ರದಲ್ಲಿ ಹಮ್ಮಿಕೊಳ್ಳಲಾಗಿದ್ದ ರಾಷ್ಟ್ರಕವಿ ಕುವೆಂಪುರವರ ಜನ್ಮದಿನೋತ್ಸವ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ, ಅವರು ಮಾತನಾಡಿದರು.

ಕನ್ನಡ ಸಾಹಿತ್ಯಕ್ಕೆ ಅಪಾರ ಕೊಡುಗೆ ನೀಡಿದ ಕುವೆಂಪು ರವರ ಪ್ರತಿಯೊಂದು ಕೃತಿಗಳು ಓದುಗರಲ್ಲಿ ಸಾಹಿತ್ಯಾಭಿರುಚಿಯನ್ನು ಬೆಳೆಸುತ್ತದೆ, ಇಂದಿನ ಯುವಪೀಳಿಗೆ ಮೊಬೈಲ್ ಗಳ ವ್ಯಾಮೋಹಕ್ಕೆ ಒಳಗಾಗದೇ ಕುವೆಂಪುರವರಂತಹ ಶ್ರೇಷ್ಠ ಸಾಹಿತಿಗಳ ಕಾದಂಬರಿಗಳು, ನಾಟಕಗಳನ್ನು ಓದುವ ಮೂಲಕ ಸಾಹಿತ್ಯಾಸಕ್ತಿಯನ್ನು ಬೆಳೆಸಿಕೊಳ್ಳಬೇಕು ಎಂಬುದಾಗಿ ಹೇಳಿದರು.

ಈ ಕಾರ್ಯಕ್ರಮದಲ್ಲಿ ನಿವೃತ್ತ ಉಪನ್ಯಾಸಕರಾದ ಟಿ.ಶಿವಪ್ರಸಾದ್, ದೈಹಿಕ ಶಿಕ್ಷಣ ಅಧಿಕಾರಿಗಳಾದ ರವೀಂದ್ರ ನಾಯ್ಕ, ತಾಲೂಕು ಪಂಚಾಯಿತಿ ಸಹಾಯಕ ಲೆಕ್ಕಾಧಿಕಾರಿಗಳಾದ ಎಂ.ತಿಪ್ಪೇಸ್ವಾಮಿ, ಶಿಕ್ಷಕರಾದ ರಘು, ರೇಷ್ಮೆ ಇಲಾಖೆ ಕೊಂಡಯ್ಯ, ಶ್ರೀನಿವಾಸ್ ರೆಡ್ಡಿ, ಎಸ್.ಎನ್.ಮಂಜುನಾಥ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿವರ್ಗದವರು ಉಪಸ್ಥಿತರಿದ್ದರು.
