
ಹಿರಿಯೂರು:
ಸಾರ್ವಜನಿಕರ ಕಣ್ಣಿನ ಆರೋಗ್ಯದ ಸುರಕ್ಷತೆಗಾಗಿ ರೋಟರಿ ಹಾಗೂ ರೆಡ್ ಕ್ರಾಸ್ ಸಂಸ್ಥೆಯ ಸಹಯೋಗದಲ್ಲಿ ಉಚಿತ ಕಣ್ಣಿನ ಆರೋಗ್ಯ ತಪಾಸಣೆ ಶಿಬಿರವನ್ನು ಹಮ್ಮಿಕೊಳ್ಳಲಾಗಿದ್ದು, ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂಬುದಾಗಿ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಅಧ್ಯಕ್ಷರಾದ ಹೆಚ್.ಎಸ್.ಸುಂದರ್ ರಾಜ್ ಹೇಳಿದರು.
ತಾಲ್ಲೂಕಿನ ಯಲ್ಲದಕೆರೆ ಗ್ರಾಮದ ಶ್ರೀಜ್ಞಾನಜ್ಯೋತಿ ಪ್ರೌಢಶಾಲೆಯಲ್ಲಿ ಮಂಗಳವಾರದಂದು ಭಾರತೀಯ ರೆಡ್ ಕ್ರಾಸ್ ಹಾಗೂ ರೋಟರಿ ಸಂಸ್ಥೆ, ಸರ್ವೋದಯ ಬ್ರಹ್ಮಜ್ಞಾನ ಸಮಾಜ ಹಾಗೂ ಬಸವೇಶ್ವರ ಮೆಡಿಕಲ್ ಕಾಲೇಜು ಇವರುಗಳ ಸಹಯೋಗದೊಂದಿಗೆ ಹಮ್ಮಿಕೊಳ್ಳಲಾಗಿದ್ದ ಉಚಿತ ನೇತ್ರ ತಪಾಸಣಾ ಮತ್ತು ಶಸ್ತ್ರಚಿಕಿತ್ಸಾ ಶಿಬಿರವನ್ನು ಉದ್ಘಾಟಿಸಿ, ನಂತರ ಅವರು ಮಾತನಾಡಿದರು.
ಸಮಾಜಸೇವಕಿ ಶ್ರೀಮತಿ ಶಶಿಕಲಾ ರವಿಶಂಕರ್ ಮಾತನಾಡಿ, ಕಣ್ಣುಗಳು ನಮ್ಮ ಜೀವನಕ್ಕೆ ಅತ್ಯಗತ್ಯವಾಗಿದ್ದು, ಕಣ್ಣಿನ ಸುರಕ್ಷತೆಯನ್ನು ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಈ ಕಣ್ಣಿನ ಆರೋಗ್ಯ ಶಿಬಿರಗಳಲ್ಲಿ ಭಾಗವಹಿಸುವ ಮೂಲಕ ನಿಮ್ಮ ಕಣ್ಣಿನ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಎಂಬುದಾಗಿ ಹೇಳಿದರು.
ಶ್ರೀಜ್ಞಾನಜ್ಯೋತಿ ಪ್ರೌಢಶಾಲೆಯ ಮುಖ್ಯಸ್ಥರಾದ ಬಿ.ಜಿ.ಮನೋಹರ್ ಮಾತನಾಡಿ, ಕಣ್ಣಿನ ಆರೋಗ್ಯವನ್ನು ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ನೇತ್ರ ತಪಾಸಣೆ ಶಿಬಿರವನ್ನು ಹಮ್ಮಿಕೊಂಡಿದ್ದು, ಈ ಶಿಬಿರದ ಸೌಲಭ್ಯವನ್ನು ಗ್ರಾಮೀಣ ಜನರು ಸದುಪಯೋಗಪಡಿಸಿಕೊಳ್ಳಬೇಕು ಎಂಬುದಾಗಿ ಅವರು ಹೇಳಿದರು.
ನೇತ್ರ ತಜ್ಞ ಡಾ. ಜಾವೇದ್ ಅವರು ಮಾತನಾಡಿ, ಈ ಶಿಬಿರದಲ್ಲಿ ಸುಮಾರು ನೂರು ಜನ ನಾಗರಿಕರು ತಪಾಸಣೆ ಗೆ ಒಳಗಾಗಿ ಐವತ್ತು ಜನರು ಉಚಿತ ಶಸ್ರ ಚಿಕಿತ್ಸೆಗೆ ಆಯ್ಕೆಯಾದರು. ಆಯ್ಕೆಯಾದವರಿಗೆ ಬಸವೇಶ್ವರ ಮೆಡಿಕಲ್ ಕಾಲೇಜಿನಲ್ಲಿ ಉಚಿತ ಶಸ್ತ್ರ ಚಿಕಿತ್ಸೆಯನ್ನು ನೀಡಲಾಗುವುದು ಎಂಬುದಾಗಿ ಅವರು ಹೇಳಿದರು.
ಈ ಕಾರ್ಯಕ್ರಮದಲ್ಲಿ ದಾನಿಗಳಾದ ಸಣ್ಣಭೀಮಣ್ಣ, ಸಿ.ನಾರಾಯಣಚಾರ್ ಹಾಗೂ ಶಾಲಾ ಶಿಕ್ಷಕರು ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
