
ಹಿರಿಯೂರು :
ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಸರ್ಕಾರದಿಂದ 5300 ಕೋಟಿ ಹಾಗೂ ರಾಜ್ಯ ಸರ್ಕಾರದಿಂದ 5000 ಕೋಟಿ ರೂಗಳ ಹಣ ಬಿಡುಗಡೆ ಮಾಡುವಂತೆ ಒತ್ತಾಯಿಸಿ, ಸುಮಾರು 40ಕಿ.ಮೀ. ಪಾದಯಾತ್ರೆ ಮಾಡಿ, ಎಲ್ಲಾ ತಾಲ್ಲೂಕುಗಳನ್ನು ಬಂದ್ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲದ ಕಾರಣ ಮಾರ್ಚ್ 2 ರಿಂದ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಅನಿರ್ಧಿಷ್ಠ, ಅಹೋರಾತ್ರಿ, ಅಮರಣಾಂತರ ಉಪವಾಸ ಸತ್ಯಾಗ್ರಹ ಹಮ್ಮಿಕೊಳ್ಳಲು ನಿರ್ಧರಿಸಲಾಗಿದೆ ಎಂಬುದಾಗಿ ಜಿಲ್ಲಾ ರೈತ ಸಂಘದ ಜಿಲ್ಲಾಧ್ಯಕ್ಷರಾದ ಕೆ.ಟಿ.ತಿಪ್ಪೇಸ್ವಾಮಿ ಹೇಳಿದರು.
ಈಗಾಗಲೇ ಈ ಕುರಿತು ಮಾನ್ಯ ಜಿಲ್ಲಾಧಿಕಾರಿಗಳಿಗೆ ರೈತಸಂಘದ ವತಿಯಿಂದ ಮನವಿಪತ್ರ ಸಲ್ಲಿಸಿರುವ ಜೊತೆಗೆ ಒಂದು ವಾರದ ಒಳಗಾಗಿ ಮಾನ್ಯ ಮುಖ್ಯಮಂತ್ರಿಗಳಿಗೆ ಈ ಬಾರಿಯ ಬಜೆಟ್ ನಲ್ಲಿ ರಾಜ್ಯ ಸರ್ಕಾರದಿಂದ 5000 ಕೋಟಿ ಹಣ ಮೀಸಲಿಡುವಂತೆ ಮನವಿಪತ್ರ ಸಲ್ಲಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ.ಸುಧಾಕರ್ ರವರಿಗೆ ಒತ್ತಾಯಿಸಿದ್ದರೂ ಯಾವುದೇ ಪ್ರಯೋಜನವಾಗಿಲ್ಲ.
ಬಜೆಟ್ ಮಂಡನೆ ಮುಗಿದ ನಂತರ ಯಾವುದೇ ಹೋರಾಟ ಮಾಡಿದರೂ ಪ್ರಯೋಜನವಿಲ್ಲ ಆದಕಾರಣ ಬರದನಾಡಾದ ಹಿರಿಯೂರಿನ ವಾಣಿವಿಲಾಸ ಸಾಗರಕ್ಕೆ ಭದ್ರೆ ನೀರನ್ನು ಹರಿಸಲು ರಾಜ್ಯದ ಎಲ್ಲಾ ರೈತರು ಈ ಹೋರಾಟದಲ್ಲಿ ಪಾಲ್ಗೊಳ್ಳುವ ಮೂಲಕ ಹೋರಾಟದ ಯಶಸ್ಸಿಗೆ ಸಹಕರಿಸಬೇಕು ಎಂಬುದಾಗಿ ಜಿಲ್ಲೆಯ ಎಲ್ಲಾ ರೈತಮುಖಂಡರಲ್ಲಿ ಹಾಗೂ ರೈತಬಾಂಧವರಲ್ಲಿ ಮನವಿ ಮಾಡಿದ್ದಾರೆ.
