
ಹಿರಿಯೂರು :
ಮಕ್ಕಳಿಗೆ ವಿವಿಧ ಕಾಲಘಟ್ಟಗಳಲ್ಲಿ ವಾತಾವರಣದಲ್ಲಿ ಉಂಟಾಗುವ ಬದಲಾವಣೆಯನ್ನು ಪರಿಚಯಿಸುವ ನಿಟ್ಟಿನಲ್ಲಿ ಮಳೆ ಹಾಗೂ ಮಳೆಗಾಲದ ವಾತಾವರಣದಲ್ಲಿ ಕೊಡೆಯ ಅವಶ್ಯಕತೆ ತಿಳಿಸುವ ಜೊತೆಗೆ ಮಕ್ಕಳಿಗೆ ಮನೋರಂಜನೆ ನೀಡುವ ಉದ್ದೇಶದಿಂದ ನಮ್ಮ ಶಾಲೆಯಲ್ಲಿ “ಅಂಬ್ರೆಲಾ-ಡೇ” ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂಬುದಾಗಿ ವಾಣಿವಿಲಾಸ ವಿದ್ಯಾಸಂಸ್ಥೆಯ ಕಾರ್ಯದರ್ಶಿಗಳಾದ ಆಲೂರು ಹನುಮಂತರಾಯಪ್ಪ ಹೇಳಿದರು.

ನಗರದ ವಾಣಿವಿಲಾಸ ವಿದ್ಯಾಸಂಸ್ಥೆ ಆವರಣದಲ್ಲಿ ಎಲ್.ಕೆ.ಜಿ ಹಾಗೂ ಯು.ಕೆ.ಜಿ.ವಿದ್ಯಾರ್ಥಿಗಳಿಗೆ ಹಮ್ಮಿಕೊಳ್ಳಲಾಗಿದ್ದ “ಅಂಬ್ರೆಲಾ-ಡೇ” ಕಾರ್ಯಕ್ರಮವನ್ನು ಗಿಡಕ್ಕೆ ನೀರೆಯುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.

ವಿದ್ಯಾರ್ಥಿಗಳಿಗೆ ಪಠ್ಯ ಚಟುವಟಿಕೆಗಳ ಜೊತೆಗೆ ಸಹಪಠ್ಯ ಚಟುವಟಿಕೆಗಳನ್ನು ಕೊಡಬೇಕೆಂಬ ಉದ್ದೇಶದಿಂದ ನಮ್ಮ ಶಾಲೆಯಲ್ಲಿ ವಿವಿಧ ರೀತಿಯ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದ್ದು, ವಿದ್ಯಾರ್ಥಿಗಳು ಬಣ್ಣಬಣ್ಣದ ಕೊಡೆಗಳನ್ನು ಹಿಡಿದು, ವಿವಿಧ ಹಾಡುಗಳಿಗೆ ನೃತ್ಯವನ್ನು ಮಾಡುವುದರಿಂದ ಅವರ ಮನಸ್ಸಿಗೆ ಮನೋಲ್ಲಾಸ ಉಂಟಾಗುತ್ತದೆ ಎಂಬುದಾಗಿ ಅವರು ಹೇಳಿದರು.

ಈ ಕಾರ್ಯಕ್ರಮದಲ್ಲಿ ವಿದ್ಯಾಸಂಸ್ಥೆಯ ಮುಖ್ಯಶಿಕ್ಷಕಿ ಶ್ರೀಮತಿಸೌಮ್ಯ, ವ್ಯವಸ್ಥಾಪಕಿ ಶ್ರೀಮತಿ ವಸಂತಾ, ಆಡಳಿತಾಧಿಕಾರಿ ಶ್ರೀಮತಿ ಹೇಮಲತಾ, ಕಾರ್ಯಕ್ರಮ ಸಂಯೋಜಕರಾದ ಶ್ರೀಮತಿ ಭಾಗ್ಯ, ಶ್ರೀಮತಿ ಜಯಸುಧಾ, ಪೂಜಾ, ಗೌತಮಿ, ಸಾಕಮ್ಮ ಸೇರಿದಂತೆ ವಿದ್ಯಾರ್ಥಿ-ವಿದ್ಯಾರ್ಥಿನಿಯರು ಪಾಲ್ಗೊಂಡಿದ್ದರು.
