
ಹಿರಿಯೂರು :
ವಿದ್ಯಾರ್ಥಿಗಳಲ್ಲಿ ಬಾಲ್ಯದಲ್ಲಿಯೇ ದೇಶಭಕ್ತಿ, ದೇಶ ಸೇವೆಯ ಮನೋಭಾವ ಹಾಗೂ ಉತ್ತಮ ವ್ಯಕ್ತಿತ್ವವನ್ನು ಬೆಳೆಸುವ ಉದ್ದೇಶದಿಂದ ಇಂತಹ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ ಎಂಬುದಾಗಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆಯ ಅಧ್ಯಕ್ಷರಾದ ಸುಂದರರಾಜ್ ತಿಳಿಸಿದರು.
ನಗರದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಹಿಂಭಾಗದಲ್ಲಿರುವ ಹಿರಿಯ ಪ್ರಾಥಮಿಕ ಶಾಲೆಯ ಸಭಾಂಗಣದಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್, ಕರ್ನಾಟಕ, ಜಿಲ್ಲಾ ಸಂಸ್ಥೆ ಚಿತ್ರದುರ್ಗ ಹಾಗೂ ಸ್ಥಳೀಯ ಸಂಸ್ಥೆ ಹಿರಿಯೂರು ವತಿಯಿಂದ ಕಬ್, ಬುಲ್ ಬುಲ್ಸ್, ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಿಗಾಗಿ ಹಮ್ಮಿಕೊಳ್ಳಲಾಗಿದ್ದ ಸ್ಥಳೀಯ ಮಟ್ಟದ “ಗೀತಗಾಯನಸ್ಪರ್ಧೆ” ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ, ಅವರು ಮಾತನಾಡಿದರು.

ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಶಿಕ್ಷಣ ಸಂಯೋಜಕರಾದ ಜಾಫರ್ ಮಾತನಾಡಿ, ಸ್ಕೌಟ್ಸ್ ಮತ್ತು ಗೈಡ್ಸ್ ಚಟುವಟಿಕೆಗಳು ಮಕ್ಕಳಲ್ಲಿ ಶಿಸ್ತು, ದೇಶಭಕ್ತಿ ಹಾಗೂ ಸೇವಾ ಮನೋಭಾವವನ್ನು ಬೆಳೆಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ. ವಿದ್ಯಾರ್ಥಿಗಳು ದೇಶದ ವೀರಯೋಧರ ಆದರ್ಶಗಳನ್ನು ಅಳವಡಿಸಿಕೊಂಡು ಉತ್ತಮ ನಾಗರೀಕರಾಗಬೇಕು ಎಂಬುದಾಗಿ ಕರೆನೀಡಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಸಹಾಯಕ ಆಯುಕ್ತರಾದ ಶ್ರೀಮತಿ ಧನಲಕ್ಷ್ಮೀ, ಜಿಲ್ಲಾ ಸ್ಥಾನಿಕ ಆಯುಕ್ತರಾದ ಭೀಮಣ್ಣ, ಶ್ರೀಮತಿ ನಾಗಸುಂದ್ರಮ್ಮ, ಬಿ.ಕೆ.ನಾಗಣ್ಣ, ಶ್ರೀಮತಿ ಪಾರ್ವತಮ್ಮ ಹಾಗೂ ಉಪಾಧ್ಯಕ್ಷರಾದ ಶ್ರೀಮತಿ ಚಂದ್ರವದನಾ, ಶ್ರೀಮತಿ ನಾಗರತ್ನಮ್ಮ, ಸೇರಿದಂತೆ ಸಂಸ್ಥೆಯ ಸದಸ್ಯರು ಉಪಸ್ಥಿತರಿದ್ದರು.

ಕಾರ್ಯಕ್ರಮದ ಆಯೋಜನೆಯಲ್ಲಿ ಶ್ರೀ ಕೋಟಿಲಿಂಗಯ್ಯ, ಸ್ಥಳೀಯ ಸಂಸ್ಥೆ ಕಾರ್ಯದರ್ಶಿ ಹಾಗೂ ಶ್ರೀಮತಿ ಆಸೀನಾ, ಸ್ಥಳೀಯ ಸಂಸ್ಥೆ ಸಹ ಕಾರ್ಯದರ್ಶಿ ಪ್ರಮುಖ ಪಾತ್ರ ವಹಿಸಿದರು. ಜಿಲ್ಲಾ ಸಂಸ್ಥೆಯ ವತಿಯಿಂದ ಶ್ರೀ ಚಿದಾನಂದ ಎಲ್., ಜಿಲ್ಲಾ ಯುವ ಸಮಿತಿ ಕಾರ್ಯದರ್ಶಿ ಭಾಗವಹಿಸಿದ್ದರು. ವಿವಿಧ ಶಾಲೆಗಳ ಸ್ಕೌಟ್ ಮಾಸ್ಟರ್ಗಳು ಮತ್ತು ಗೈಡ್ ಕ್ಯಾಪ್ಟನ್ಗಳು ಉಪಸ್ಥಿತರಿದ್ದರು.
ಗೀತಾ ಗಾಯನ ಸ್ಪರ್ಧೆಯಲ್ಲಿ ಜಟ್ ಗೊಲ್ಲಹಳ್ಳಿ ಸಿಬಿಎಸ್.ಸಿ ಶಾಲೆ, ಗಂಗಾ ಸೆಂಟರ್ ಸ್ಕೂಲ್ ಹಿರಿಯೂರು, ಹಿರಿಯ ಪ್ರಾಥಮಿಕ ಶಾಲೆ ದಿಂಡಾವರ, ಕಿರಿಯ ಪ್ರಾಥಮಿಕ ಶಾಲೆ ಇದ್ದಲನಾಗೇನಹಳ್ಳಿ, ಕಿರಿಯ ಪ್ರಾಥಮಿಕ ಶಾಲೆ ಶಿವಪುರ, ಕಿರಿಯ ಪ್ರಾಥಮಿಕ ಶಾಲೆ ಹಿರಿಯೂರು, ಯಜ್ಞವಲ್ಕ ಶಾಲೆ ಭೀಮನಬಂಡೆ ಹಾಗೂ ನಾಯಕರಕೊಟ್ಟಿಗೆ, ಹಿರಿಯ ಪ್ರಾಥಮಿಕ ಶಾಲೆ ಸೇರಿದಂತೆ ವಿವಿಧ ಶಾಲೆಗಳ ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸಿದರು.
ಸ್ಪರ್ಧೆಯ ನಂತರ ಅಧ್ಯಕ್ಷರಾದ ಹೆಚ್.ಎಸ್.ಸುಂದರ್ ರಾಜ್ ಸಮಾರೋಪ ಭಾಷಣ ಮಾಡಿದರು. ಸ್ಪರ್ಧೆಯಲ್ಲಿ ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆದ ತಂಡಗಳಿಗೆ ಬಹುಮಾನಗಳನ್ನು ವಿತರಿಸಲಾಯಿತು. ಕಾರ್ಯಕ್ರಮವು ವಿದ್ಯಾರ್ಥಿಗಳಲ್ಲಿ ದೇಶಭಕ್ತಿ, ಶಿಸ್ತು, ಸಾಮೂಹಿಕತೆ ಹಾಗೂ ಸೇವಾ ಮನೋಭಾವವನ್ನು ಬೆಳೆಸುವ ಸಂದೇಶದೊಂದಿಗೆ ಯಶಸ್ವಿಯಾಗಿ ನಡೆಯಿತು.
