
ಹಿರಿಯೂರು :
ಮೈಸೂರು ರಾಜ್ಯಕ್ಕೆ ಕರ್ನಾಟಕ ಎಂದು ನಾಮಕರಣ ಮಾಡುವ ಮೂಲಕ ಕನ್ನಡವನ್ನು ಆಡಳಿತ ಭಾಷೆಯಾಗಿ ಘೋಷಣೆ ಮಾಡಿದ ಕೀರ್ತಿ ಬಡವರ ಬಂಧು, ಹಿಂದುಳಿದ ವರ್ಗಗಳ ಆಶಾಕಿರಣ ಮಾಜಿ ಮುಖ್ಯಮಂತ್ರಿ ದೇವರಾಜ್ ಅರಸುರವರಿಗೆ ಸಲ್ಲುತ್ತದೆ ಎಂಬುದಾಗಿ ವಾಣಿಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಡಿ.ಧರಣೇಂದ್ರಯ್ಯ ಹೇಳಿದರು.
ನಗರದ ರೋಟರಿ ಸಭಾಭವನದಲ್ಲಿ ಹಿರಿಯೂರು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಪ್ರಗತಿಪರ ಸಾಧನೆಗಳ ಸರದಾರ, ಸಾಮಾಜಿಕ ಪರಿವರ್ತನೆಯ ಹರಿಕಾರ ಮಾಜಿ ಮುಖ್ಯಮಂತ್ರಿ ದೇವರಾಜ್ ಅರಸುರವರ 111 ನೇ ಜಯಂತ್ಯೋತ್ಸವ ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸ ನೀಡಿ ಅವರು ಮಾತನಾಡಿದರು.

ಸಿಲಿಕಾನ್ ಸಿಟಿಗೆ ಅಡಿಗಲ್ಲು ಹಾಕಿದ ಭೂಸುಧಾರಣೆ, ಗ್ರಾಮೀಣಾಭಿವೃದ್ಧಿಯ ಹರಿಕಾರ ದೇವರಾಜ್ ಅರಸುರವರು ಹಿಂದುಳಿದವರ ಹಾಗೂ ಅಲ್ಪಸಂಖ್ಯಾತರ ಮಕ್ಕಳಿಗೆ ವಿದ್ಯಾರ್ಥಿ ನಿಲಯಗಳನ್ನು ಸ್ಥಾಪಿಸುವ ಮೂಲಕ ಹಿಂದುಳಿದವರ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಿದರಲ್ಲದೆ, ಜೀತಪದ್ಧತಿ ನಿರ್ಮೂಲನಾ ಕಾಯ್ದೆಯನ್ನು ಜಾರಿಗೆ ತಂದರು ಎಂಬುದಾಗಿ ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ತಾಲ್ಲೂಕು ತಹಶೀಲ್ದಾರರಾದ ಸಿದ್ದೇಶ್ ರವರು ಮಾತನಾಡಿ, ಶೋಷಿತರ, ದಲಿತರ ಬೆಳಕಾಗಿದ್ದ ಮಾಜಿ ಮುಖ್ಯಮಂತ್ರಿ ದೇವರಾಜ್ ಅರಸುರವರು ಉಳುವವನೇ ಭೂಮಿಯ ಒಡೆಯ ಎಂದು ರೈತರ, ಬಡವರ ಧ್ವನಿಯಾದರು, ಇವರು ಆಡಳಿತದಲ್ಲಿ ತಂದ ಸುಧಾರಣೆಗಳು ಇಂದಿನ ರಾಜಕೀಯ ನಾಯಕರಿಗೆ ಮಾದರಿ ಎಂಬುದಾಗಿ ಹೇಳಿದರು.
ಇದೇ ಸಂದರ್ಭದಲ್ಲಿ ಕಾರ್ಯನಿರ್ವಹಣಾಧಿಕಾರಿಗಳಾದ ಡಾ.ಜಿ.ಕೆ.ಪ್ರಮೋದ್, ಪೋಲೀಸ್ ಇನ್ಸ್ ಪೆಕ್ಟರ್ ಮಹಮದ್ ಸಿರಾಜ್, ರೈತಸಂಘದ ಕಾರ್ಯಾಧ್ಯಕ್ಷ ಕೆ.ಸಿ.ಹೊರಕೇರಪ್ಪ, ಬಸವರಾಜ್, ಬಸವರಾಜ್ ನಾಯಕ್ ಮಾತನಾಡಿದರು.

ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ತಾಲ್ಲೂಕು ತಹಶೀಲ್ದಾರರಾದ ಎಂ.ಸಿದ್ದೇಶ್ ವಹಿಸಿದ್ದರು.ಕಾರ್ಯಕ್ರಮದಲ್ಲಿ ಕಾರ್ಯನಿರ್ವಹಣಾಧಿಕಾರಿಗಳಾದ ಡಾ.ಜಿ.ಕೆ.ಪ್ರಮೋದ್, ಪೋಲೀಸ್ ಇನ್ಸ್ ಪೆಕ್ಟರ್ ಮಹಮದ್ ಸಿರಾಜ್, ತಾಲ್ಲೂಕು ಕಲ್ಯಾಣಾಧಿಕಾರಿಗಳಾದ ಶಿವಕುಮಾರ್, ಸರ್ಕಾರಿ ನೌಕರರ ಸಂಘದ ಗಿರೀಶ್, ರೈತಸಂಘದ ಕಾರ್ಯಾಧ್ಯಕ್ಷ ಕೆ.ಸಿ.ಹೊರಕೇರಪ್ಪ, ಕಲಾವಿದ ಮಾರುತೇಶ್ ಕೂನಿಕೆರೆ, ಬಸವರಾಜ್, ತೋಟಗಾರಿಕೆ ಇಲಾಖೆ ಶ್ರೀನಿವಾಸ್, ಬಸವರಾಜ್ ನಾಯಕ್, ಶಿವಕುಮಾರ್ ಅಂಗನವಾಡಿ ಕಾರ್ಯಕರ್ತೆಯರು, ಬಿ.ಸಿ.ಹಾಸ್ಟೆಲ್ ಸಿಬ್ಬಂದಿಗಳು, ಉಪಸ್ಥಿತರಿದ್ದರು.
