
ಹಿರಿಯೂರು:
ತಾಲ್ಲೂಕಿನ ಧರ್ಮಪುರ ಹೋಬಳಿಯ ಹರಿಯಬ್ಬೆಪಾಳ್ಯದ ಗೊಲ್ಲರಹಟ್ಟಿಯಲ್ಲಿ ಕಳೆದ ಎರಡು ದಿನಗಳಿಂದ ಸುರಿದ ಮಳೆಯಿಂದ ಗ್ರಾಮದಲ್ಲಿ ತೊಂದರೆ ಉಂಟಾಗಿದ್ದು, ಸೋಮವಾರ ಸಂಜೆ ತುಂತುರುಮಳೆ ಸುರಿಯುತ್ತಿದ್ದ ವೇಳೆ ತೆಂಗಿನ ಮರದ ಬೇರುಗಳು ಸಡಿಲಗೊಂಡು, ಸಾಮಾಜಿಕ ಜಾಲತಾಣಗಳಲ್ಲಿ ಸದಾ ಸಕ್ರಿಯರಾಗಿರುವ ಗ್ರಾಮಸ್ಥ ರಂಗನಾಥ್ ಕಾಡುಗೊಲ್ಲ ಅವರ ಮನೆಯ ಮೇಲೆ ಬಿದ್ದು ಮನೆ ಹಾನಿಗೊಳಗಾದ ಘಟನೆ ಸಂಭವಿಸಿದೆ ಎನ್ನಲಾಗಿದೆ.

ಸದ್ಯಕ್ಕೆ ಕುಟುಂಬದ ಸದಸ್ಯರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮನೆಯು ಭಾಗಶಃ ಹಾನಿಗೊಳಗಾಗಿದ್ದು, ಸಂಬಂಧಿಸಿದ ತಾಲ್ಲೂಕು ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಹಾನಿಗೊಳಗಾದ ರೈತ ರಂಗನಾಥ್ ಕುಟುಂಬಕ್ಕೆ ತಕ್ಷಣದ ನೆರವು ನೀಡುವಂತೆ ಗ್ರಾಮಸ್ಥರು ಮನವಿ ಮಾಡಿದ್ದಾರೆ.

ಈ ಸುದ್ದಿ ತಿಳಿದ ಕೂಡಲೇ ಹಿರಿಯೂರು ತಾಲ್ಲೂಕು ಬಿ.ಜೆ.ಪಿ. ಅಧ್ಯಕ್ಷರಾದ ಅಭಿನಂದನ್ ಅವರು ಸ್ವತಃ ಸ್ಥಳಕ್ಕೆ ಭೇಟಿ ನೀಡಿ, ಕುಟುಂಬದ ಸದಸ್ಯರನ್ನು ಭೇಟಿಯಾಗಿ, ಅವರಿಗೆ ವೈಯಕ್ತಿಕ ಧನಸಹಾಯ ಮಾಡಿದರಲ್ಲದೆ, ಸರ್ಕಾರದ ಅಧಿಕಾರಿಗಳ ಜೊತೆ ದೂರವಾಣಿಯಲ್ಲಿ ಮಾತನಾಡಿ ಸರ್ಕಾರದ ಮೂಲಕ ಸಹ ಅನುದಾನ ಕೊಡಿಸುವುದಾಗಿ ಭರವಸೆ ನೀಡಿದ್ದಾರೆ ಎಂಬುದಾಗಿ ಮಾಧ್ಯಮಗಳಿಗೆ ಮಾಹಿತಿ ತಿಳಿದು ಬಂದಿದೆ.


